ಕವನ ವಾಚನ - Kannada Kavana Vaachana
ನನ್ನ ಹಣತೆ - ಕವನ ವಾಚನ
Episode notes
ಹಣತೆ ಹಚ್ಚುತ್ತೇನೆ ನಾನೂ,
ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆ
ಇದರಲ್ಲಿ ಮುಳುಗಿ ಕರಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ,
ಹಣತೆ ಹಚ್ಚುತ್ತೇನೆ ನಾನೂ;
ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ
ಆಸೆಯಿಂದಲ್ಲ.
ಕತ್ತಲಿನಿಂದ ಕತ್ತಲೆಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ
ಶತಮಾನದಿಂದಲೂ.
ನಡು ನಡುವೆ ಒಂದಷ್ಟು ಬೆಳಕು ಬೇಕೆಂದು
ಆಗಾಗ ಕಡ್ಡಿ ಗೀಚಿದ್ದೇವೆ,
ದೀಪ ಮುಡಿಸಿದ್ದೇವೆ,
ವೇದ, ಶಾಸ್ತ್ರ, ಪುರಾಣ, ಇತಿಹಾಸ, ಕಾವ್ಯ, ವಿಜ್ಞಾನಗಳ
ಮತಾಪು-ಪಟಾಕಿ-ಸುರುಸುರುಬತ್ತಿ-ಹೂಬಾಣ
ಸುಟ್ಟಿದ್ದೇವೆ.
"ತಮಸೋ ಮಾ ಜ್ಯೋತಿರ್ಗಮಯಾ" ಎನ್ನುತ್ತ ಬರೀ
ಬೂದಿಯನ್ನೇ ಕೊನೆಗೆ ಕಂಡಿದ್ದೇವೆ.
ನನಗೂ ಗೊತ್ತು, ಈ ಕತ್ತಲೆಗೆ
ಕೊನೆಯಿರದ ಬಾಯಾರಿಕೆ
ಎಷ್ಟೊಂದು ಬೆಳಕನ್ನು ಇದು ಉಟ್ಟರೂ, ತೊಟ್ಟರೂ
ತಿಂದರೂ, ಕುಡಿದರೂ, ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನುವ ಬಯಕೆ.
ಆದರೂ ಹಣತೆ ಹಚ್ಚುತ್ತೇನೆ ನಾನೂ,
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ,
ಇರುವಷ್ಟು ಹೊತ್ತು ನಿನ್ನ ಮುಖ ನಾನು, ನನ್ನ ಮುಖ ನೀನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ;
ಹಣತೆ ಆರಿದ ಮೇಲೆ, ನೀನು ಯಾರೋ, ಮತ್ತೆ
ನಾನು ಯಾರೋ.
- ಜಿ.ಎಸ್.ಎಸ್. ಶಿವರುದ್ರಪ್ಪ
ಕವನ ಸಂಕಲನ: ಗೋಡೆ (1972)
https://parashuramakalappanagoji.blogspot.com/2018/11/blog-post.html